
ಧರ್ಮಸ್ಥಳ, ಜನವರಿ 07 : ಜನರು ರಾಜಕೀಯ ಅಡಚಣೆಗಳನ್ನು ಮೀರಿ ಬೆಳೆಯಬೇಕು ಮತ್ತು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ತಲುಪಲು ಸಹಾಯ ಮಾಡಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಉದ್ಘಾಟಿಸಿ ಮಾತನಾಡಿದ ಧಂಖರ್ ಅವರು, “ವಿಭಜನೆ ಮತ್ತು ತಪ್ಪು ಮಾಹಿತಿಯಿಂದ ನಮ್ಮನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿರುವ ಭಾರತ ವಿರೋಧಿ ಶಕ್ತಿಗಳನ್ನು ನಾವು ತಟಸ್ಥಗೊಳಿಸಬೇಕು ಎಂದರು.
ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಈ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಇದು ಕೇವಲ ಕಟ್ಟಡ ಮಾತ್ರವಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ. ಎಲ್ಲರಿಗೂ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಧಂಖರ್ ಮತ್ತು ಅವರ ಪತ್ನಿ ಡಾ.ಸುದೇಶ ಧಂಖರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.