
ಬೆಂಗಳೂರು, ಅಕ್ಟೋಬರ್ 28: ಇತ್ತೀಚೆಗೆ ರಾಜ್ಯದಾದ್ಯಂತ ಸುದ್ದಿಯಲ್ಲಿದ್ದ ಪರಿಶಿಷ್ಟ ಜಾತಿ ಮೀಸಲಾತಿಗೆ ಒಳ ಮೀಸಲಾತಿ ಕಲ್ಪಿಸಿ ಜಾರಿ ಮಾಡುವಂತೆ ನಡೆದ ಹೋರಾಟಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇಂದು (ಅ.28) ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,” ಒಳಮೀಸಲಾತಿ ಕಲ್ಪಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿದೆ. ಹಾಗಾಗಿ, ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಅನುಮೋದನೆ ನೀಡಿದೆ ಎಂದಿದ್ದಾರೆ.
ಒಳಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಒಂದು ಆಯೋಗ ರಚಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಈ ಆಯೋಗ ವರದಿ ನೀಡಲಿದೆ. ಈ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಚಿವ ಡಾ. ಹೆಚ್.ಸಿ ಮಹದೇವಪ್ಪ ಮಾತನಾಡಿ, ಚುನಾವಣಾ ಮುನ್ನ ನಾವು ಒಳಮೀಸಲಾತಿ ಜಾರಿಯ ವಾಗ್ದಾನ ಮಾಡಿದ್ದೆವು. ಸುಪ್ರೀಂ ಕೋರ್ಟ್ ಕೂಡ ಒಳಮೀಸಲಾತಿ ಪರ ತೀರ್ಪು ನೀಡಿದೆ. ನಮ್ಮ ಸರ್ಕಾರ ಒಳಮೀಸಲಾತಿ ಜಾರಿಗೆ ಬದ್ದವಾಗಿದೆ ಎಂದು ಹೇಳಿದ್ದಾರೆ.