
ರಾಮನಗರ, ನವೆಂಬರ್ 23 : ಆಡಳಿತಾರೂಢ ಕಾಂಗ್ರೆಸ್ ಎಲ್ಲಾ ಮೂರು ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಆ ಮೂಲಕ, ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲನ್ನು ಕಂಡಿದ್ದಾರೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಬಿಜೆಪಿಯ ಬಂಗಾರು ಹನುಮಂತು ಅವರನ್ನು 9,568 ಮತಗಳಿಂದ ಸೋಲಿಸಿದ್ದಾರೆ. ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಭರತ್ ಬೊಮ್ಮಾಯಿಯವರನ್ನು 13,448 ಮತಗಳಿಂದ ಸೋಲಿಸಿದ್ದಾರೆ.
ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳ ಭಾರೀ ಅಂತರದಿಂದ ಸೋಲಿಸಿದ್ದಾರೆ. ಆ ಮೂಲಕ, ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಬಹುದು ಎನ್ನುವ ನಿರೀಕ್ಷೆ ಸುಳ್ಳಾಗಿದೆ.
ಪದೇ ಪದೇ ಸೋಲುತ್ತಿರುವ ನಿಖಿಲ್ ಕುಮಾರಸ್ವಾಮಿ ಮುಂದಿನ ರಾಜಕೀಯ ಬದುಕಿನಲ್ಲಿ ಯಾವೆಲ್ಲ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಅನ್ನುವುದನ್ನು ಕಾದು ನೋಡಬೇಕಿದೆ.